ಅನಿತಾ ಕುಮಾರಸ್ವಾಮಿ ಮತ್ತು ಪ್ರಜ್ವಲ್‌ ರೇವಣ್ಣಗೆ ಟಿಕೆಟ್‌ ನೀಡುವುದು ಬಹುತೇಕ ಖಚಿತ

24 Oct 2017 9:39 AM | General
7119 Report

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಪ್ರಜ್ವಲ್‌ ರೇವಣ್ಣ ಮತ್ತು ಚೆನ್ನಪಟ್ಟಣದಿಂದ ಅನಿತಾ ಕುಮಾರಸ್ವಾಮಿ ಅವರಿಗೆ ಜೆಡಿಎಸ್‌ ಟಿಕೆಟ್‌ ನೀಡುವುದು ಬಹುತೇಕ ಖಚಿತವಾಗಿದೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಎಚ್‌.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್‌ ರೇವಣ್ಣ ಸಿದ್ಧತೆ ನಡೆಸುತ್ತಿದ್ದರೆ, ಚೆನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಲು ಅನಿತಾ ಕುಮಾರಸ್ವಾಮಿ ಸ್ಪರ್ಧೆಗೆ ವೇದಿಕೆ ಸಜ್ಜಾಗುತ್ತಿದೆ.ವಿಧಾನಸಭೆ ಚುನಾವಣೆಗೆ ಕುಟುಂಬದಿಂದ ಇಬ್ಬರು ಮಾತ್ರ ಸ್ಪರ್ಧಿಸುತ್ತಾರೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಹೇಳುತ್ತಿದ್ದರೂ, ಅಂತಿಮ ಕ್ಷಣದಲ್ಲಿ ಪ್ರಜ್ವಲ್‌ ಮತ್ತು ಅನಿತಾ ಅವರಿಗೆ ಟಿಕೆಟ್‌ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಪ್ರಬಲ ಅಭ್ಯರ್ಥಿ ಇಲ್ಲ. ಪ್ರಜ್ವಲ್‌ ಸ್ಪರ್ಧಿಸಿದರೆ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಕ್ಷೇತ್ರದಲ್ಲಿ ಪ್ರಜ್ವಲ್‌ ಸ್ಪರ್ಧಿಸುವಂತೆ ಒತ್ತಡವಿದೆ. ಇದರಿಂದಾಗಿ ಅಂತಿಮ ಕ್ಷಣದಲ್ಲಿ ಪ್ರಜ್ವಲ್‌ ಟಿಕೆಟ್‌ ಪಡೆಯುವುದು ಗ್ಯಾರೆಂಟಿ. ಇವರ ಸ್ಪರ್ಧೆಯಿಂದ ಸುತ್ತಮುತ್ತಲಿನ ಎರಡರಿಂದ ಮೂರು ಕ್ಷೇತ್ರಗಳ ಮೇಲೆ ಪ್ರಭಾವ ಆಗುತ್ತದೆ’ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದರು.ಪ್ರಜ್ವಲ್‌ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಹಾಸನದಿಂದ ಕಣಕ್ಕೆ ಇಳಿಸುವ ಉದ್ದೇಶ ದೇವೇಗೌಡರಗಿದೆ. ಆದರೆ, ದೇವೇಗೌಡರ ಮಾತನ್ನು ಕೇಳುವ ಸ್ಥಿತಿಯಲ್ಲಿ ಪ್ರಜ್ವಲ್‌ ಇಲ್ಲ ಎಂದೂ ಮೂಲಗಳು ವಿವರಿಸಿವೆ.ರೇವಣ್ಣ ಕುಟುಂಬದಿಂದ ಇಬ್ಬರು ಮತ್ತು ಕುಮಾರಸ್ವಾಮಿ ಕುಟುಂಬದಿಂದ ಇಬ್ಬರಿಗೆ ಟಿಕೆಟ್‌ ನೀಡುವ ಮೂಲಕ ಕುಟುಂಬದಲ್ಲಿ ಸಮತೋಲನ ಕಾಪಾಡುವ ಕಸರತ್ತು ನಡೆಯಲಿದೆ ಎಂದೂ ಮೂಲಗಳು ಸ್ಪಷ್ಟಪಡಿಸಿವೆ.

 

Edited By

Shruthi G

Reported By

Shruthi G

Comments