ಜೆಡಿಎಸ್ ಎಲೆಕ್ಷನ್ ಪ್ಲಾನ್ : ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪರಿಶೀಲನಾ ಸಭೆ

11 Sep 2017 9:53 AM | Politics
450 Report

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಕಂಕಣಬದ್ಧವಾಗಿರುವ ಜಾತ್ಯತೀತ ಜನತಾದಳ(ಜೆಡಿಎಸ್) ನಗರದ ಎಲ್ಲಾ 27 ವಿಧಾನಸಭಾ ಕ್ಷೇತ್ರಗಳಲ್ಲೂ ಪರಿಸ್ಥಿತಿ ಪರಿಶೀಲನಾ ಸಭೆ ನಡೆಸಲು ತೀರ್ಮಾನಿಸಿದೆ.

ಸೆ.15ರಿಂದ ಒಂದು ತಿಂಗಳ ಕಾಲ ಆಯಾಯ ವಿಧಾನಸಭಾ ಕ್ಷೇತ್ರದಲ್ಲಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಶಾಸಕ ಗೋಪಾಲಯ್ಯ, ನಗರ ಜೆಡಿಎಸ್ ಘಟಕ ಅಧ್ಯಕ್ಷ ಆರ್.ಪ್ರಕಾಶ್, ರಾಜ್ಯ ಕಾನೂನು ಘಟಕ ಅಧ್ಯಕ್ಷ ರಂಗನಾಥ್ ನೇತೃತ್ವದಲ್ಲಿ ಈ ಪರಿಶೀಲನಾ ಸಭೆಗಳು ನಡೆಯಲಿವೆ.ಈಗಾಗಲೇ ಸಭೆಯ ವೇಳಾಪಟ್ಟಿ , ಸಮಯ, ಸಭೆ ನಡೆಯುವ ಸ್ಥಳಗಳನ್ನು ನಿಗದಿಪಡಿಸಲಾಗಿದ್ದು , ಬೂತ್, ವಾರ್ಡ್ ಮಟ್ಟದ ಪದಾಧಿಕಾರಿಗಳ ನೇಮಕ ಕುರಿತು ಸ್ಥಳೀಯರ ಸಮಸ್ಯೆ, ಅಭ್ಯರ್ಥಿಗಳ ಆಯ್ಕೆ ವಿಚಾರ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.  

ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಮನೆಗೆ ಕುಮಾರಣ್ಣ ಜಾಥಾ ನಡೆಸಲಾಗಿತ್ತು. ಇದೀಗ ನಗರ ಜೆಡಿಎಸ್ ಘಟಕವು ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್‍ಗಳಲ್ಲಿ ಮತ್ತೆ ಜಾಥಾ ನಡೆಸಲು ತೀರ್ಮಾನಿಸಿದೆ. ಜಾಥಾದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದ ಸಮಯದಲ್ಲಿ ಕೈಗೊಂಡಿದ್ದ ಯೋಜನೆಗಳ ಬಗ್ಗೆ ಹಾಗೂ ಎಚ್.ಡಿ.ದೇವೇಗೌಡ ಪ್ರಧಾನಿಯಾಗಿದ್ದಾಗ ಸಿಲಿಕಾನ್ ಸಿಟಿಗೆ ನೀಡಿರುವ ಕೊಡುಗೆಗಳ ಬಗ್ಗೆ ನಗರದ ಜನತೆಗೆ ಮನವರಿಕೆ ಮಾಡಿಕೊಡುವ ಕಾರ್ಯಕ್ರಮ ಹಮ್ಮಿಕೊಂಡಿದೆ.

ಪ್ರಸಕ್ತ ಬೆಂಗಳೂರು ನಗರದಲ್ಲಿ ಕೇವಲ ಮೂರು ಮಂದಿ ಜೆಡಿಎಸ್ ಶಾಸಕರಿದ್ದು , ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಇನ್ನೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಜೆಡಿಎಸ್ ನಿರ್ಧರಿಸಿದೆ. ಮಹಾಲಕ್ಷ್ಮಿ ಲೇಔಟ್‍ನಲ್ಲಿ ಜೆಡಿಎಸ್ ಪ್ರಬಲವಾಗಿದ್ದು, ಶಾಸಕ ಗೋಪಾಲಯ್ಯ ಅವರು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ. ಇನ್ನು ಪುಲಿಕೇಶಿನಗರ ಹಾಗೂ ಚಾಮರಾಜಪೇಟೆಯಲ್ಲಿ ಜೆಡಿಎಸ್ ವಿರುದ್ದ ಬಂಡಾಯ ಎದ್ದಿರುವ ಅಖಂಡ ಶ್ರೀನಿವಾಸಮೂರ್ತಿ, ಜಮೀರ್ ಅಹಮ್ಮದ್ ಅವರಿಗೆ ಪರ್ಯಾಯ ಅಭ್ಯರ್ಥಿಗಳ ಆಯ್ಕೆಯ ಬಗ್ಗೆಯೂ ಚರ್ಚೆ ನಡೆಯಲಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿಗಿಂತ ಹೆಚ್ಚು ಮತಗಳನ್ನು ಪಡೆದಿತ್ತು. ಹಾಗಾಗಿ ಕೆಲವೇ ಅಂತರದಲ್ಲಿ ಸೋಲು ಅನುಭವಿಸಿದ ಅಭ್ಯರ್ಥಿಗಳೊಂದಿಗೆ ಚರ್ಚೆ ನಡೆಸಿ ಆಯಾ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಪಕ್ಷ ಸಂಘಟನೆಗೆ ಹೆಚ್ಚು ಆದ್ಯತೆ ನೀಡಲು ತೀರ್ಮಾನಿಸಿದೆ.

 

 

Courtesy: eesanje

Comments