ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯಲು 500 ಎಕರೆ ಪ್ರದೇಶದಲ್ಲಿ ನಡೆಯಲಿದೆ ಜೆಡಿಎಸ್ ಬೃಹತ್ ಸಮಾವೇಶ

14 Feb 2018 11:17 AM |
1293 Report

ಜೆಡಿಎಸ್ ಪಕ್ಷದ ಕುಮಾರ ಪರ್ವ ಸಮಾವೇಶವು ಫೆ.17ರಂದು ಮಧ್ಯಾಹ್ನ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಯಲಹಂಕ ಸಮೀಪದಲ್ಲಿ ನಡೆಯಲಿದ್ದು, ವೇದಿಕೆ ಸಿದ್ಧಪಡಿಸಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭೂಮಿಪೂಜೆ ನೆರವೇರಿಸಿದರು.ಸುಮಾರು 130 ಎಕರೆ ಪ್ರದೇಶದಲ್ಲಿ ಬೃಹತ್ ಜೆಡಿಎಸ್ ಸಮಾವೇಶ ನಡೆಸಲುದ್ದೇಶಿಸಿದ್ದು, ಇಂದಿನಿಂದ ಕುಮಾರ ಪರ್ವ ಕಾರ್ಯಕ್ರಮದ ವೇದಿಕೆ ಹಾಗೂ ಸಮಾವೇಶದ ಸಿದ್ಧತೆ ಕಾರ್ಯಗಳಿಗೆ ಚಾಲನೆ ನೀಡಲಾಯಿತು.

ಸುಮಾರು 500 ಎಕರೆ ಪ್ರದೇಶದಲ್ಲಿ ಸಮಾವೇಶಕ್ಕೆ ಆಗಮಿಸಲು ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರಿಗೆ ಐದು ಕಡೆಗಳಿಂದ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜೆಡಿಎಸ್ ಯುವ ಜನತಾದಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಸುದ್ದಿಗಾರರಿಗೆ ತಿಳಿಸಿದರು. ಪ್ರತಿ ವಿಧಾನಸಭಾ ಕ್ಷೇತ್ರದಿಂದ 2500 ರಿಂದ 3000 ಕಾರ್ಯಕರ್ತರು, ಮುಖಂಡರು, ಸಾರ್ವಜನಿಕರು ಬರುವ ನಿರೀಕ್ಷೆಯಿದ್ದು, ಸುಮಾರು 7 ರಿಂದ 8 ಲಕ್ಷ ಮಂದಿ ಕುಮಾರ ಪರ್ವದಲ್ಲಿ ಸಮಾವೇಶಗೊಳ್ಳಲಿದ್ದಾರೆ ಎಂದರು.ಅತಿಗಣ್ಯರು, ಗಣ್ಯರು, ಸಾಮಾನ್ಯ ಗಣ್ಯರು ಹೀಗೆ ಎಲ್ಲರಿಗೂ ಪ್ರತ್ಯೇಕವಾದ ಆಸನ ವ್ಯವಸ್ಥೆ ಮತ್ತು ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಮುಖ್ಯ ವೇದಿಕೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹಾಗೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. ಇದು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ನಡೆಸಿದ ಸಮಾವೇಶಕ್ಕಿಂತ ದೊಡ್ಡ ಮಟ್ಟದಲ್ಲಿ ನಡೆಯಲಿದೆ. ಈ ಸಮಾವೇಶವು ಒಂದು ಶಕ್ತಿ ಪ್ರದರ್ಶನ ಎಂದರು.

ಇದೇ ಸಂದರ್ಭದಲ್ಲಿ ಜೆಡಿಎಸ್‍ನಿಂದ ಮೊದಲ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಅಭ್ಯರ್ಥಿಗಳು ಕೂಡ ಭ್ರಷ್ಟಾಚಾರದಲ್ಲಿ ಭಾಗಿಯಾಗುವುದಿಲ್ಲ. ಜನರ ಸೇವೆ ಮಾಡು ತ್ತೇವೆ ಎಂದು ಪ್ರಮಾಣವಚನವನ್ನು ಜನರ ಮುಂದೆ ಮಾಡಲಿದ್ದಾರೆ ಎಂದು ತಿಳಿಸಿದರು. ಈ ವೇದಿಕೆಯನ್ನು ಕಾಂಗ್ರೆಸ್, ಬಿಜೆಪಿ ಪಕ್ಷಗಳಂತೆ ಅನ್ಯ ಪಕ್ಷಗಳನ್ನು ಟೀಕೆ ಮಾಡುವುದಕ್ಕಿಂತ ಹೆಚ್ಚಾಗಿ ಜೆಡಿಎಸ್ ಪಕ್ಷವು ಅಧಿಕಾರದಲ್ಲಿದ್ದಾಗ ಏನೇನು ಯೋಜನೆಗಳನ್ನು ಜಾರಿಗೆ ತಂದಿದೆ, ಏನು ಸಾಧನೆ ಮಾಡಿದೆ, ಇದರಿಂದ ಜನರಿಗೆ ಎಷ್ಟು ಉಪಯೋಗವಾಗಿದೆ ಎಂಬುದನ್ನು ಮನವರಿಕೆ ಮಾಡಿಕೊ ಡಲಾಗುವುದು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನರು ನಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇ ಆದರೆ ಏನೇನು ಕೆಲಸಗಳನ್ನು ಮಾಡುತ್ತೇವೆ ಎಂದು ಜನರ ಮುಂದಿಡಲು ಬಳಸಿಕೊಳ್ಳಲಾಗುವುದು ಎಂದು ವಿವರಿಸಿದರು.ಸಮಾವೇಶವನ್ನು ಶಿಸ್ತುಬದ್ಧವಾಗಿ ಮತ್ತು ಅಚ್ಚುಕಟ್ಟಾಗಿ ನಡೆಸಲು 30 ಪ್ರತ್ಯೇಕ ವಿಭಾಗಗಳನ್ನು ಮಾಡಿ ಪ್ರತಿ ವಿಭಾಗಕ್ಕೂ ನಿರ್ವಹಣೆ ಮಾಡಲು ಪಕ್ಷದ ಮುಖಂಡರನ್ನು ನಿಯೋಜಿಸಲಾಗುತ್ತದೆ. ಸಮಾವೇಶಕ್ಕೆ ಆಗಮಿಸುವ ಎಲ್ಲರೂ ಕಾರ್ಯಕ್ರಮವನ್ನು ವೀಕ್ಷಿಸಲು 35ಕ್ಕೂ ಹೆಚ್ಚು ಡಿಜಿಟಲ್ ಸ್ಕ್ರೀನ್‍ಗಳನ್ನು ಅಳವಡಿಸಲಾಗುವುದು. ಅಂದು ಫೆ.17 ಮಧ್ಯಾಹ್ನ ಕುಮಾರಪರ್ವ ಸಮಾವೇಶ ನಡೆಯಲಿದ್ದು, ಇದರಲ್ಲಿ ಪಾಲ್ಗೊಳ್ಳುವವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕುಡಿಯುವ ನೀರು, ಊಟ, ತಿಂಡಿ ವ್ಯವಸ್ಥೆಯನ್ನು ಕ್ರಮಬದ್ಧವಾಗಿ ಮಾಡಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದರು.

Edited By

Shruthi G

Reported By

hdk fans

Comments