ಬಿಜೆಪಿ-ಕಾಂಗ್ರೆಸ್ ತೊರೆದ ನಾಯಕರು ಜೆಡಿಎಸ್ ಸೇರ್ಪಡೆ..!!

04 Mar 2018 3:35 PM |
9801 Report

ರಾಜ್ಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಿಂದ ಯಾವುದೇ ಅಭಿವೃದ್ಧಿಯಾಗದೆ ಇರುವುದರಿಂದ ರಾಜ್ಯದ ಜನರು ಪ್ರಾದೇಶಿಕ ಪಕ್ಷವಾದ ಜೆಡಿಎಸ್‍ನತ್ತ ಒಲವು ತೋರಿದ್ದು, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಅತ್ಯಧಿಕ ಸ್ಥಾನಗಳನ್ನು ಗಳಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿತವೆಂದು ಮಾಜಿ ಸಚಿವ ಹಾಗೂ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಜೀವಿಜಯ ವಿಶ್ವಾಸ ವ್ಯಕ್ತಪಡಿಸಿದರು.

ಹೊಸಪಟ್ಟಣದ ಸಮುದಾಯ ಭವನದಲ್ಲಿ ಏರ್ಪಡಿಸಲಾದ ನೆಲ್ಯಹುದಿಕೇರಿ, ವಾಲ್ನೂರು, ನಂಜರಾಯಪಟ್ಟಣ, ಚೆಟ್ಟಳ್ಳಿ, ಗುಡ್ಡೆಹೊಸೂರು, ಕಂಬಿಬಾಣೆ, ಹೊಸಕೋಟೆ ಗ್ರಾಮಗಳ ಸ್ಥಾನೀಯ ಸಮಿತಿ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವ ಮೂಲಕ ಎಚ್.ಡಿ ಕುಮಾರಸ್ವಾಮಿಯವರು ಮುಂದಿನ ಮುಖ್ಯಮಂತ್ರಿ ಆಗುವುದು ಖಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು. ಇತ್ತೀಚೆಗೆ ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದ ಸಮಾವೇಶದಲ್ಲಿ 10 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಿದ್ದು, ಇಂತಹ ಜನಸ್ತೋಮ ಯಾವುದೇ ಪಕ್ಷದ ಸಮಾವೇಶದಲ್ಲಿ ಈವರೆಗೂ ಕಂಡುಬಂದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಆದಲ್ಲಿ ರೈತರ ಸಾಲಮನ್ನ ಹಾಗೂ ಬಡವರ ಪಿಂಚಣಿಯನ್ನು ರೂ. 5,000 ಏರಿಸುವ ಗುರಿಯನ್ನು ಹೊಂದಿದ್ದಾರೆ ಎಂದರು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನಗತ್ಯವಾಗಿ ಜನರ ಮೇಲೆ ತೆರಿಗೆ ವಿಧಿಸುತ್ತಿದ್ದಾರೆ ಎಂದು ಆರೋಪಿಸಿದರು. ಮಾಯದೇವಿರವರು ಪಕ್ಷಕ್ಕೆ ಬೆಂಬಲ ನೀಡಿದ್ದು ಆನೆಬಲ ಬಂದಂತಾಗಿದೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ರಾಜ್ಯ ಜೆಡಿಎಸ್ ಪರಿಶಿಷ್ಟ ಜಾತಿ, ಪಂಗಡದ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ಎನ್ ರಾಜಾರಾವ್ ಮಾತನಾಡಿ, ರಾಜ್ಯದಲ್ಲಿ 20 ತಿಂಗಳ ಆಡಳಿತ ನಡೆಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಡವರಿಗೆ, ರೈತರಿಗೆ ಅನುಕೂಲವಾಗುವ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ಬಡವರಿಗೆ ಹಕ್ಕು ಪತ್ರ ಹಾಗೂ ಲಾಟರಿ, ಸಾರಾಯಿ ನಿಷೇಧದಂತ ಉತ್ತಮ ಯೋಜನೆಗಳನ್ನು ಬಡವರಿಗೆ ನೀಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದರ್ಪದಿಂದ ವರ್ತಿಸುತ್ತಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಜೈಲಿಗೆ ಹೋಗಿ ಬಂದಿದ್ದಾರೆಂದು ಟೀಕಿಸಿದರು. ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ದನೆಗೊಳ್ಳುತ್ತಿದ್ದು, ಜಿಲ್ಲೆಯ 2 ಸ್ಥಾನಗಳಲ್ಲಿ ಜೆಡಿಎಸ್ ಪಕ್ಷ ಜಯಗಳಿಸುವುದೆಂದು ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಯಾವುದೇ ಗ್ರಾಮಗಳಲ್ಲಿ ಹುಲಿ ಅಥಾವ ಕಾಡಾನೆ ದಾಳಿ ನಡೆಸಿದ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯನವರು ಸ್ಥಳಕ್ಕೆ ಭೇಟಿ ನೀಡಿ ತನ್ನ ವೈಯಕ್ತಿಕವಾಗಿ ಧನ ಸಹಾಯ ನೀಡುತ್ತಿರುವುದು ಹಾಗೂ ಸ್ಪಂದಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಭೆಯಲ್ಲಿ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಸಿ.ಎಲ್ ವಿಶ್ವ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಸಾಕ್, ಪ್ರಚಾರ ಸಮಿತಿಯ ಅಧ್ಯಕ್ಷ ಕೆ.ಎಂ.ಬಿ ಗಣೇಶ್ ಮಾತನಾಡಿದರು.ಇದೇ ಸಂದರ್ಭ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷ ತೊರೆದು ಹಲವಾರು ನಾಯಕರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗದ ಘಟಕದ ಅಧ್ಯಕ್ಷ ಶಿವದಾಸ್, ಜಿ.ಪಂ ಮಾಜಿ ಸದಸ್ಯ ಶಾಂತ್‍ಕುಮಾರ್, ಗ್ರಾ.ಪಂ ಸದಸ್ಯರಾದ ಡೆನ್ನಿಬೋರಸ್, ತಮ್ಮಯ್ಯ, ಚಂದ್ರವತಿ, ವಿವಿಧ ಗ್ರಾಮಗಳ ಸ್ಥಾನೀಯ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು. ಜಾಶೀರ್ ಸ್ವಾಗತಿಸಿ ವಿಶ್ವ ವಂದಿಸಿದರು.

Edited By

Shruthi G

Reported By

hdk fans

Comments